ಮುಳಬಾಗಲು: ಕಾರ್ಮಿಕರಿಗೆ ವಿಶೇಷ ಕಾನೂನುಗಳಿದ್ದು, ಪ್ರತಿಯೊಬ್ಬರೂ ಇದನ್ನು ಸದುಪಯೋಗ ಪಡಿಸಿಕೊಂಡು ನ್ಯಾಯ ಪಡೆದುಕೊಳ್ಳಬೇಕು ಎಂದು ಹೆಚ್ಚುವರಿ ಸಿವಿಲ್ ನ್ಯಾಯಾಧೀಶೆ ಎಂ. ಸ್ನೇಹ ತಿಳಿಸಿದರು.
ನಗರದ ತಾಪಂ ಕಚೇರಿಯಲ್ಲಿ ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಹಾಗೂ ಕಾರ್ಮಿಕರ ಇಲಾಖೆ ಸಂಯುಕ್ತಾಶ್ರಯದಲ್ಲಿ ಏರ್ಪಡಿಸಿದ್ದ ಅಂತಾರಾಷ್ಟ್ರೀಯ ಕಾರ್ಮಿಕರ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು. ಕಾರ್ಮಿಕ ಸಮುದಾಯ ವರ್ಷಪೂರ್ತಿ ತನ್ನ ವೃತ್ತಿಯಲ್ಲಿ ತೊಡಗಿಸಿಕೊಂಡಿರುತ್ತಾರೆ. ಆದರೆ ಕೆಲವರು ತಮ್ಮ ಆರೋಗ್ಯದ ಬಗ್ಗೆ ಹೆಚ್ಚಿನ ಕಾಳಜಿ ವಹಿಸದೇ ಇರುವುದರಿಂದ ತುಂಬ ತೊಂದರೆ ಅನುಭವಿಸುವಂತಾಗುತ್ತದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬ ಕಾರ್ಮಿಕ ತಮ್ಮಆರೋಗ್ಯದ ಕಡೆ ಹೆಚ್ಚಿನ ಗಮನ ನೀಡಬೇಕು ಎಂದು ತಿಳಿಸಿದರು.
ವಾರ್ಷಿಕ ಆದಾಯ 3 ಲಕ್ಷ ರೂಪಾಯಿಗಳಿಂಗಿತ ಕಡಿಮೆ ಇರುವ ಎಲ್ಲಾ ವರ್ಷದ ಜಾತಿಯ ಜನರು ಉಚಿತ ಕಾನೂನು ಸಲಹೆಯನ್ನು ತಾಲೂಕು ಕಾನೂನು ಸೇವಾ ಸಮಿತಿಯಿಂದ ಪಡೆಯಬಹುದಾಗಿದೆ ಎಂದರು.
ಕಾರ್ಮಿಕ ನಿರೀಕ್ಷಕಿ ಆಶಾರಾಣಿ , ತಾಲೂಕು ವಕೀಲರ ಸಂಘದ ಅಧ್ಯಕ್ಷ ಎನ್. ಸತೀಶ್ ಕುಮಾರ್, ಮಾಜಿ ಅಧ್ಯಕ್ಷ ಎಂ.ಎಸ್. ಶ್ರೀನಿವಾಸರೆಡ್ಡಿ, ಪ್ರಧಾನ ಕಾರ್ಯದರ್ಶಿ ಎಚ್. ನಾಗೇಶ್, ಉಪಾಧ್ಯಕ್ಷ ಸಿ.ವಿ.ಶ್ರೀನಿವಾಸಪ್ಪ ವಕೀಲರಾದ ಎಂ. ದಯಾನಂದ್, ಸಿ. ಸುಬ್ರಮಣಿ, ಮತ್ತಿತರರು ಇದ್ದರು.